ವನ್ಯಜೀವಿ ಸಪ್ತಾಹದ ಕತ್ತಲೆ ಆರಂಭ: ಎಂಎಂ ಹಿಲ್ಸ್ನಲ್ಲಿ ಹುಲಿ ಹತ್ಯೆ
ಬೆಂಗಳೂರು, ಅ. 3: ವನ್ಯಜೀವಿ ಸಪ್ತಾಹದ ಪ್ರಾರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆಯಾಗಿರುವುದು ರಾಜ್ಯದಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಈ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸ್ಮಿತಾ ಬಿಜ್ಜೂರು ನೇತೃತ್ವದ ವಿಶೇಷ ತನಿಖಾ ತಂಡದಿಂದ ಪರಿಶೀಲನೆ ನಡೆಸಲು ಆದೇಶಿಸಿದ್ದಾರೆ.
ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಅರ್ಧ ಕಳೇಬರ ಸ್ಥಿತಿಯಲ್ಲಿರುವ ಹುಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಖಂಡ್ರೆ ಅವರು ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿ, ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಈ ಕಾನನದಲ್ಲಿ ನಡೆದ ಕಳ್ಳಬೇಟೆ ಪ್ರಕರಣಗಳ ವರದಿಗಳನ್ನು ಪರಾಮರ್ಶಿಸಿ, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ, ಜೊತೆಗೆ ಹುಲಿ ಹಂತಕರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.
ತನಿಖಾ ವರದಿಯನ್ನು 8 ದಿನಗಳ ಒಳಗೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ವನ್ಯಜೀವಿ ಧಾಮದಲ್ಲಿ ನಡೆಯುತ್ತಿರುವ ನಿರಂತರ ಕಳ್ಳಬೇಟೆಯನ್ನು ತಡೆಯಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.
ಇತರೆ ಸುದ್ದಿಗಳು